ರಾಯಬಾಗ:ಶಾಲಾ ಶುಲ್ಕ ಪಾವತಿಸದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲು ನಿರಾಕರಿಸಿದ ಘಟನೆ ಮೊರಬ ಗ್ರಾಮದ ಅಜಿತ ಬಾನೆ ಪ್ರೌಢ ಶಾಲೆಯಲ್ಲಿ ನಡೆದಿದೆ.
ಈ ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ಮಹಾದೇವ ಸನಮುರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಕಾರಣಕ್ಕೂ ಪ್ರವೇಶ ಪತ್ರಗಳನ್ನು ತಡೆಹಿಡಿಯಬಾರದು ಎಂದು ಶಾಲಾ ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳ ತಕ್ಷಣದ ಹಸ್ತಕ್ಷೇಪದಿಂದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗಿದ್ದು, ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಯಿತು. ಈ ವೇಳೆ ಪಾಲಕರು ಮತ್ತು ಗ್ರಾಮಸ್ಥರು ಅಧಿಕಾರಿಗಳ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಣವು ಮಕ್ಕಳ ಮೂಲಭೂತ ಹಕ್ಕಾಗಿದ್ದು, ಶುಲ್ಕದ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಣ ಸಂಯೋಜಕ ವಿಠ್ಠಲ ತೇರದಾಳೆ, ಸಿಆರ್ ಸಿ ಸುಲೇಮಾನ್ ಶೇಖ, ಅಭಿಷೇಕ ನರಸಗೌಡರ, ಸಿದ್ರಾಮ ಮಂಡಾಲೆ, ಶಿವನಾಯಕ ಯಳ್ಳೂರೆ,ಯುವರಾಜ ಮನ್ನಿಕೇರಿ, ಭೀಮ್ ಚೌಗಲಾ ಸೇರಿದಂತೆ ಪಾಲಕ ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.